ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ
ಚಪ್ಪರ ಶ್ರೀನಿವಾಸಪ.
ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ
ದರ್ಪಕತಾತನೆ ತಾ ಸಜ್ಜನಪ್ರೀತಅ.ಪ.
ಮಾಧವ ನಿನ್ನಯ ಮಹಿಮೆ ತಿಳಿಯದಪ-
ರಾಧವ ಮಾಡಿದೆ ದಾರಿದ್ರ್ಯದ
ಪಾದ ದರುಶನದ
ಗಾದಿಯ ಕಾಣದಾದೆ ನಾ ದ್ರೋಹಿಯಾದೆ1
ತ್ರಾಣವಿರುವಾಗ ಕಾಣಿಕೆ ಹಾಕಿದೆ
ದೀನದಾರಿದ್ರ್ಯದ ಹೊತ್ತಿನಲಿ
ಮೇಣದರಿಂದಲಿ ತೆಗೆದು ತೆಗೆದು ಪಂಚ
ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2
ಮಂದವಾರದಿಕ್ಕೊಂದೂಟವ ಸತ್ತ್ವ
ದಿಂದಿರುವಾಗ ನಾ ನೇಮಗೈದೆ
ಮಂದಭಾಗ್ಯ ಜ್ವರದಿಂದ ಪೀಡಿತನಾದ-
ರಿಂದೆರಡೂಟವನೂ ಮಾಡಿದೆ ನಾನು3
ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ
ಮಿನುಗುವ ಡಬ್ಬಿಯ ನಾ ಮಾಡಿದೆ
ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ
ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4
ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ
ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ
ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ
ಗುಡ್ಡೆಯ ಮೇಲಿರುವ ಮಹಾನುಭಾವ5
ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು
ಮಂಡೆಯೊಳುರಿವುದು ಖಂಡಿತದಿ
ಪುಂಡರೀಕಾಕ್ಷನೆ ಕರುಣಾಮೃತರಸ
ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6
ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ
ಕೆಡುಕು ಮಾಡುವುದೇನು ಜಡಜನಾಭ
ಕಡಲಶಯನ ಲಕ್ಷ್ಮೀನಾರಾಯಣ ನ-
ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7